ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಸಾಲ ವಸೂಲಾತಿ ಸರಿಯಾದ ಆಗದ ಕಾರಣ ಹಲವಾರು ಸಹಕಾರ ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಹಕಾರ ಸಂಘಗಳು ಸಾಲ ವಸೂಲಾತಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸಾಲ ವಸೂಲಾತಿ ಮತ್ತು ವೆಚ್ಚದ ಬಗ್ಗೆ ಹೆಚ್ಚಿನ ನಿಗಾ ಇಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
https://chat.whatsapp.com/EbVKVnWB6rlHT1mWtsgbch
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳಿವೆ. ಇದರಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿವೆ. 14,670 ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಂಘಗಳ ಪೈಕಿ 2,200 ಹಾಲು ಉತ್ಪಾದಕ ಸಂಘಗಳೂ ಸೇರಿವೆ. ಇಷ್ಟು ದೊಡ್ಡ ಪ್ರಮಾಣದ ಸಹಕಾರ ಸಂಘಗಳು ನಷ್ಟದಲ್ಲಿರುವುದು ಸಹನೀಯವಲ್ಲ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿವೆ. ಅಂತಹ ಸಂಘಗಳ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ವಹಿಸಿ, ಹಾಲು ಉತ್ಪಾದನೆ ಹೆಚ್ಚಿಸಲು ಸಂಘದ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.



ಪ್ರಸಕ್ತ ಅವಧಿಯಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೊಟಿ ರು. ಸಾಲ ವಿತರಣೆ ಗುರಿ ಹೊಂದಲಾಗಿದೆ. ಜುಲೈ ಅಂತ್ಯಕ್ಕೆ 8.69 ಲಕ್ಷ ರೈತರಿಗೆ 8,362 ಕೋಟಿ ರೂ. ಸಾಲ ವಿತರಿಸಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಖಾತ್ರಿಪಡಿಸಬೇಕು. ನಬಾರ್ಡ್ನಿಂದ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿ 5,600 ಕೋಟಿ ರೂ. ನಿಗದಿ ಮಾಡಲಾಗಿತ್ತು. ಈ ಬಾರಿ ಶೇ. 42.21ರಷ್ಟು ಕಡಿಮೆ ಮಾಡಿ 3,236.11 ಕೋಟಿ ರೂ. ನಿಗದಿ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07ರಷ್ಟು ಪ್ರಗತಿ ಸಾಧಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಖಾಲಿ ಇರುವ ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆ ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳ ಭರ್ತಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ಸಹಕಾರ ಸಂಘಗಳ ನಿಬಂಧಕರ ಕಚೇರಿ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ನೋಂದಣಿಯಾಗಿವೆ. ಅವುಗಳನ್ನು ಹೊರತುಪಡಿಸಿ ನೋಂದಾಯಿಸಿಕೊಳ್ಳದೆ ಅನಧಿಕೃತವಾಗಿ ಕಾರ್ಯಾಚರಣೆ ಮಾಡುತ್ತಿರುವ ಗಿರಿವಿದಾರ ಸಂಸ್ಥೆ ಮತ್ತು ಚೀಟಿ ಸಂಸ್ಥೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ತಿಳಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com







