ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗದಲ್ಲಿ ಜರುಗಿತು.
https://chat.whatsapp.com/EbVKVnWB6rlHT1mWtsgbch
ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ರಾಜೇಶ್ ಕಾಮತ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಇಂತಹ ಜನಪರ ಸೇವಾ ಕಾರ್ಯಗಳು ಶ್ಲಾಘನೀಯ. ಈ ಸಹಕಾರಿ ಸಂಘದೊಂದಿಗೆ ಸತತವಾಗಿ ಗುಣಮಟ್ಟದ ಶಿಬಿರಗಳನ್ನು ಹೆಮ್ಮೆಯಿಂದ ಆಯೋಜಿಸುತ್ತಾ ಬರುತ್ತಿದ್ದೇವೆ ಎಂದರು.
ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಇದರ ಬಿ.ಡಿ.ಒ. ಜಯಚಂದ್ರ ನಾಯಕ್ ಮಾತನಾಡಿ, ಆರೋಗ್ಯ ತಪಾಸಣೆಯು ಇಂದಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿ ಅತ್ಯಗತ್ಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಸಾಮಾಜಿಕ ಕಳಕಳಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಇಂತಹ ಉನ್ನತ ಸಂಸ್ಥೆಯೊಂದಿಗೆ ಶಿಬಿರ ಆಯೋಜಿಸಲು ಅವಕಾಶ ದೊರೆತಿರುವುದು ನಮ್ಮ ಹೆಮ್ಮೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರ ಏರ್ಪಡಿಸುತ್ತಿದ್ದು, ಇದು ಸಂಘದ ೮೮ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ಹಾಗೂ ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇದರ ಆಡಳಿತ ವರ್ಗ ಹಾಗೂ ವೈದ್ಯರ ತಂಡದವರಿಗೆ ಕೃತಜ್ಞತೆ ಸಲ್ಲಿಸಿದರು.
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಪದ್ಮಾ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಲಯನ್ಸ್ ಮತ್ತು ಲಿಯೊ ಕ್ಲಬ್ ಮಂಗಳೂರು ಇದರ ಕಾರ್ಯದರ್ಶಿ ಪೌಲ್ ಅಕ್ವಿನಾಸ್, ಲಯನ್ಸ್ ಮತ್ತು ಲಿಯೊ ಕ್ಲಬ್ ಮಂಗಳೂರು ಇದರ ವಲಯ ಅಧ್ಯಕ್ಷರಾದ ಶೀನಾ ಪೂಜಾರಿ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಅಧ್ಯಕ್ಷರಾದ ನಾರಾಯಣ ಪೂಜಾರಿ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆಯ ಉಪಾನ್ಯಾಸಕರಾದ ಡಾ| ಆಲ್ಫೀಯಾ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಸಂಯೋಜಕರಾದ ರಾಜೇಶ್, ಸಮೃದ್ದಿ ಕಟ್ಟಡದ ಮಾಲಕರಾದ ಶ್ರೀಧರ್ ಮತ್ತಿತ್ತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೧೫೦ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ, ನೇತ್ರ ತಪಾಸಣೆ, ಉಚಿತ ಓಷಧಿ ವಿತರಣೆ ಹಾಗೂ ಕನ್ನಡಕ ವಿತರಣೆ ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿ, ಸಂಘದ ಸಿಬ್ಬಂದಿ ಅಕ್ಷತಾ ಪಿ. ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಭಾರ ಶಾಖಾಧಿಕಾರಿ ಹರ್ಷಿತಾ ನಿರ್ವಹಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com





