ಮಂಗಳೂರು: ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಸೆ.14ರಂದು ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’ ಆಯೋಜಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಯಾತ್ರೆಯಲ್ಲಿ 1,500ಕ್ಕೂ ಅಧಿಕ ಸಹಕಾರಿ ಸಂಘಗಳ ಪ್ರತಿನಿಧಿಗಳು, 3 ಸಾವಿರಕ್ಕೂ ಹೆಚ್ಚು ವಾಹನಗಳು ಭಾಗವಹಿಸಲಿವೆ. ಉಭಯ ಜಿಲ್ಲೆಗಳ ವಿವಿಧೆಡೆಯಿಂದ ಮಧ್ಯಾಹ್ನ 12 ಗಂಟೆಯೊಳಗೆ ಉಜಿರೆಗೆ ಆಗಮಿಸುವ ಸಹಕಾರಿ ಬಂಧುಗಳು ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದರು.


ಶುಕ್ರವಾರ ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಉಜಿರೆಯಿಂದ ಹೊರಟ ಸಹಕಾರಿಗಳ ಯಾತ್ರೆ ಧರ್ಮಸ್ಥಳ ಕ್ಷೇತ್ರ ತಲುಪಿದ ಬಳಿಕ ಮಧ್ಯಾಹ್ನ ಅಮೃತವರ್ಷಿಣಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದು, ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ಬಂಧುಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪರಂಪರೆ ಹೊಂದಿರುವ ಪವಿತ್ರ ಕ್ಷೇತ್ರ. ಇಂತಹ ಪವಿತ್ರ ಕ್ಷೇತ್ರಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತ್ರ ವಿರೋಧಿಸಿ ಅವಿಭಜಿತ ಜಿಲ್ಲೆಯ ಸಹಕಾರಿಗಳು ಧರ್ಮಜಾಗೃತಿ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು.
ಅವಿಭಜಿತ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದದಿಂದ ಪರಸ್ಪರ ಸಹಬಾಳ್ವೆಯಿಂದ ಕಾರ್ಯನಿರ್ವಹಿಸುತ್ತಿವೆ. ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ ಈ ಧರ್ಮಕ್ಷೇತ್ರಕ್ಕೆ ಅಪಚಾರ ಎಸಗುವ ಷಡ್ಯಂತ್ರಿಗಳಿಗೆ ಸ್ಪಷ್ಟ ಸಂದೇಶ ನೀಡುವ ಚಾರಿತ್ರಿಕ ಯಾತ್ರೆ ಈ ಧರ್ಮ ಜಾಗೃತಿ ಯಾತ್ರೆಯಿಂದ ನಡೆಯಲಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಲಭಿಸಿದೆ. ಇಂತಹ ಸಾಮಾಜಿಕ ಸ್ಪಂದನೆಯ ಧಾರ್ಮಿಕ ಕ್ಷೇತ್ರವನ್ನು ಅಪಪ್ರಚಾರ ಮಾಡುವ ಷಡ್ಯಂತ್ರಿಗಳು ಧಾರ್ಮಿಕ ಭಾವನೆಯನ್ನು ದುರ್ಬಲಗೊಳಿಸುತ್ತಿರುವುದು ಖಂಡನೀಯ. ಈ ರೀತಿ ಇನ್ನು ಯಾವುದೇ ಧರ್ಮ ಕ್ಷೇತ್ರಗಳಿಗೆ ಹಾಗೂ ಧರ್ಮಗಳಿಗೆ ಅಪಚಾರ ಆಗಬಾರದು. ಸಹಕಾರ ಕ್ಷೇತ್ರ ಸರ್ವಧರ್ಮಕ್ಕೂ ಗೌರವ ನೀಡುವ ಕ್ಷೇತ್ರವಾಗಿರುವುದರಿಂದ ಸರ್ವಧರ್ಮ ಸಂರಕ್ಷಣೆಯ ದೃಷ್ಟಿಯಿಂದ ಈ ಯಾತ್ರೆ ಯಶಸ್ವಿಯಾಗಿ ನಡೆಯಲಿದೆ ಎಂದರು.
ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬೆಳಪು ದೇವಿಪ್ರಸಾದ ಶೆಟ್ಟಿ, ಜೈರಾಜ್ ಬಿ.ರೈ, ಎಂ.ವಾದಿರಾಜ ಶೆಟ್ಟಿ, ಎಸ್.ಬಿ.ಜಯರಾಮ ರೈ, ಎಸ್.ಎನ್.ಮನ್ಮಥ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೈಂದೂರು, ಕುಂದಾಪುರ, ಉಡುಪಿ, ಕಾರ್ಕಳ, ಮೂಡುಬಿದಿರೆ ಕಡೆಯಿಂದ ಆಗಮಿಸುವವರು ವಾಹನಗಳಲ್ಲಿ ನೇರವಾಗಿ ಉಜಿರೆ ತಲುಪಬೇಕು. ಮಂಗಳೂರು, ಸುಳ್ಯ, ಪುತ್ತೂರು, ಬಂಟ್ವಾಳ, ಕಡಬ ತಾಲೂಕುಗಳಿಂದ ಆಗಮಿಸುವವರು ಬೆಳಗ್ಗೆ 11.30ಕ್ಕೆ ಉಜಿರೆ ತಲುಪಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧರ್ಮಜಾಗೃತಿ ಯಾತ್ರೆಗೆ ಡಾ.ಎಂ.ಎನ್.ರಾಜೇಂದ್ರಕುಮಾರ್ ಚಾಲನೆ ನೀಡಲಿದ್ದಾರೆ. 12.30ಕ್ಕೆ ತಲುಪುವ ಯಾತ್ರೆಯ ವಾಹನಗಳಿಗೆ ಅಮೃತವರ್ಷಿಣಿ ಸಭಾಂಗಣ ಹಿಂಭಾಗದ ವಿಶಾಲ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಸಭಾ ಕಾರ್ಯಕ್ರಮ, ಭೋಜನ ಬಳಿಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದರು.

