ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷವಾದ ಹಿನ್ನೆಲೆಯಲ್ಲಿ 25 ಜನರಿಗೆ ವೀಲ್ಚೇರ್, 25 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ
ಮಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸೆ.28ರ ಭಾನುವಾರ ವಿಭಿನ್ನ, ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ ಬಳಿಯ ರಾಮಕೃಷ್ಣ ಮಠದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಸೆ.28ರಂದು ಬೆಳಗ್ಗೆ 10ಕ್ಕೆ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮವಾಗಿ ಜಮ್ಮು ಕಾಶ್ಮೀರದ ರಜೌರಿಯಲ್ಲಿ ಎರಡು ವರ್ಷದ ಹಿಂದೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಮರಣವನ್ನಪ್ಪಿದ ಮಂಗಳೂರಿನ ಯುವಕ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಯಾಪ್ಟನ್ ಎಂ.ವಿ ಪ್ರಾಂಜಲ್ (Captain MV Pranjal) 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರರಾಗಿದ್ದ ಪ್ರಾಂಜಲ್, ಎಂಆರ್ಪಿಎಲ್ ಡೆಲ್ಲಿ ಸ್ಕೂಲ್ನಲ್ಲಿ ಹತ್ತನೇ ತರಗತಿ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದು, ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು. ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಗುಪ್ತಚರ ಮೂಲಗಳ ಮಾಹಿತಿ ಮೇರೆಗೆ ಸೇನೆಯ ವಿಶೇಷ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಅದರಲ್ಲಿ ಪ್ರಾಂಜಲ್ ಅವರು ಕೂಡ ಇದ್ದರು. ಇವರ ಮೇಲೆ ಬಂದೂಕುಧಾರಿ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ವೀರಮರಣವನ್ನಪ್ಪಿದ್ದರು. ಇವರಿಗೆ ಗೌರವ ಸೂಚಿಸುವ ಅಂಗವಾಗಿ ಕ್ಯಾಪ್ಟನ್ ಪ್ರಾಂಜಲ್ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದರ ಜೊತೆಗೆ ಅಶಕ್ತ 25 ಜನರಿಗೆ ವೀಲ್ಚೇರ್, 25 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ 25 ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ ತಲಾ 100 ಪುಸ್ತಕಗಳ ವಿತರಣೆ ಕಾರ್ಯಕ್ರಮವೂ ನಡೆಯಲಿದೆ.
ಕಾರ್ಯಕ್ರಮವನ್ನು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಭಾಗವಹಿಸಲಿದ್ದಾರೆ. ಅಭ್ಯಾಗತರಾಗಿ ಹೊಸದಿಗಂತ ಕನ್ನಡ ದಿನಪತ್ರಿಕೆಯ ಸಂಪಾದಕ/ಸಿಇಒ ಪಿ.ಎಸ್.ಪ್ರಕಾಶ್, ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ.ಎಂ.ಬಿ. ಪುರಾಣಿಕ್, ಎಂಆರ್ಪಿಎಲ್ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಎಂ.ವೆಂಕಟೇಶ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ., ಭಾರತಿ ಜಿ.ಭಟ್ ಭಾಗವಹಿಸಲಿದ್ದಾರೆ. ಶ್ರೀಶಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಗುರುರಾಜ್, ಉಪಾಧ್ಯಕ್ಷರಾದ ಉದಯ ವಿ.ಶಾಸ್ತ್ರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


