ಮೂಡುಬಿದಿರೆ: ಕಳೆದ ಒಂದೂವರೆ ವರ್ಷಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ಕೊನೆಗೂ ನ್ಯಾಯಾಲಯ ಅನುಮತಿ ನೀಡಿದೆ.
https://chat.whatsapp.com/FCEnlTkAKCC0MGPhXtX4i4
ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನೀಡಿದ ಆದೇಶದಂತೆ, ಜೂನ್ 3ರಂದು ಬೆಳಗ್ಗೆ 11.30ಕ್ಕೆ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಅಧಿಕೃತವಾಗಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ 2025ರ ಜುಲೈ 10ರಂದು ಚುನಾವಣೆ ನಡೆದಿತ್ತು. ಆದರೆ ಸಂಘದ ಉಪನಿಯಮಾವಳಿ ಹಾಗೂ ಮತದಾನದ ಪ್ರಕ್ರಿಯೆಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆಗೆ ತಡೆ ವಿಧಿಸಲಾಗಿತ್ತು. ಆಡಳಿತಾಧಿಕಾರಿಗಳ ಅವಧಿಯಲ್ಲೇ ಚುನಾವಣೆ ನಡೆದಿದ್ದರೂ, ಕಾನೂನು ಹೋರಾಟದ ಕಾರಣದಿಂದ ಫಲಿತಾಂಶವನ್ನು ಕಾಯ್ದಿರಿಸಲಾಗಿತ್ತು.
ಈ ನಡುವೆ, ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯದಲ್ಲಿ ದಾಖಲಾಗಿದ್ದ ದಾವೆ ಪ್ರಕರಣದ ವಿಚಾರಣೆ ಪೂರ್ಣಗೊಂಡು, ಮೇ 25ರಂದು ಅಂತಿಮ ಆದೇಶ ಹೊರಬಿದ್ದಿದೆ.
ನ್ಯಾಯಾಲಯದ ಈ ಮಹತ್ವದ ಆದೇಶದ ಹಿನ್ನೆಲೆಯಲ್ಲಿ, ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ರಿಟರ್ನಿಂಗ್ ಅಧಿಕಾರಿ ಜೂನ್ 3ರಂದು ಫಲಿತಾಂಶ ಘೋಷಣೆಗೆ ದಿನ ನಿಗದಿಪಡಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳು ಅಂದು ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

