ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಎಸ್.ಆರ್ ಸತೀಶ್ಚಂದ್ರ ಅಭಿಪ್ರಾಯ
ಶಿರ್ವ: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ಚಂದ್ರ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ಸಹಕಾರಿ ಸಂಸ್ಥೆಗಳು ಹೆಚ್ಚಿನ ವೃತ್ತಿಪರತೆ, ಪಾರದರ್ಶಕತೆ ಹಾಗೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಒತ್ತು ನೀಡಬೇಕಿದ್ದು, ಸದಸ್ಯ ಕೇಂದ್ರಿತ ಸೇವೆಗಳ ಮೂಲಕ ಸಹಕಾರಿ ಚಳವಳಿಯನ್ನು ಮತ್ತಷ್ಟು ಬಲಪಡಿಸಬೇಕು. ಸಹಕಾರ ಭಾರತಿ ದೇಶದ ಏಕೈಕ ಸಹಕಾರ ಕ್ಷೇತ್ರದ ಸ್ವಯಂಸೇವಾ ಸಂಘಟನೆಯಾಗಿದ್ದು, ಇನ್ನೆರಡು ವರ್ಷಗಳಲ್ಲಿ ತನ್ನ ಸುವರ್ಣ ಮಹೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಡಗೆರೆ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ನಿಗದಿತ ದಿನಾಂಕದಂದು ನಿಯಮಿತ ಜಿಲ್ಲಾ ಕಾರ್ಯಕಾರಿಣಿ ಸಭೆಗಳನ್ನು ನಡೆಸುವ ಜೊತೆಗೆ, ಪ್ರತಿ ತಿಂಗಳೂ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಜಿಲ್ಲಾ ಪ್ರಮುಖರಿಗೆ ಮಾರ್ಗದರ್ಶನ ನೀಡಿದರು. ರಾಜ್ಯ ಕಾರ್ಯದರ್ಶಿ ಮಾಧುಸ್ವಾಮಿ ಮಾತನಾಡಿ, ನವೆಂಬರ್ನಲ್ಲಿ ಮೈಸೂರು ನಗರದ ಹೊರವಲಯದ ಬನ್ನೂರಿನಲ್ಲಿ ಮೈಸೂರು ವಿಭಾಗದ ಹೈನುಗಾರ ಪ್ರಕೋಷ್ಟದ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು. ಸಹಕಾರ ಭಾರತಿ ಕೊಡಗು ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಡಿಸೆಂಬರ್ನಲ್ಲಿ ಮಡಿಕೇರಿಯಲ್ಲಿ ಮೈಸೂರು ವಿಭಾಗದ ಒಂದು ದಿನದ ಪ್ಯಾಕ್ಸ್ ಪ್ರಕೋಷ್ಟದ ಅಭ್ಯಾಸ ವರ್ಗ ಆಯೋಜಿಸಲಾಗುವುದು ಎಂದು ಹೇಳಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ ಬಿ.ಆರ್. ಮಾತನಾಡಿ, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಆಗಸ್ಟ್ 31ರೊಳಗೆ ಪೂರ್ಣ ಪ್ರಮಾಣದ ಜಿಲ್ಲಾ ಸಮಿತಿಗಳನ್ನು ರಚಿಸಿ ಸಂಘಟನೆಯ ಚಟುವಟಿಕೆಗಳಿಗೆ ವೇಗ ನೀಡುವಂತೆ ವಿಭಾಗದ ಪ್ರಮುಖರಿಗೆ ಸೂಚಿಸಿದರು.

ರಾಜ್ಯ ಮಹಿಳಾ ಪ್ರಮುಖ್ ವಿದ್ಯಾ ಪೈ, ರಾಷ್ಟ್ರೀಯ ಗ್ರಾಹಕ ಭಂಡಾರ ಪ್ರಮುಖ್ ಭಾರತಿ ಭಟ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮಂಜುನಾಥ ಎಸ್ ಕೆ ಉಪಸ್ಥಿತರಿದ್ದರು. ಸಭೆಯಲ್ಲಿ ಮೈಸೂರು ವಿಭಾಗದ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪ್ರಮುಖರು ತಮ್ಮ ಜಿಲ್ಲೆಗಳ ಕಾರ್ಯಚಟುವಟಿಕೆಗಳ ವರದಿಯನ್ನು ಮಂಡಿಸಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬೃಹತ್ ಹೈನುಗಾರರ ಸಮಾವೇಶ, ಮಂಗಳೂರು ಮಹಾನಗರದಲ್ಲಿ ಕ್ರೆಡಿಟ್ ಸಹಕಾರಿ ಸಮಾವೇಶ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ಯಾಕ್ಸ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಯಿತು.
ಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗಡೆ ಆತ್ರಾಡಿ ಸ್ವಾಗತಿಸಿದರು. ಮೈಸೂರು ವಿಭಾಗ ಪ್ರಮುಖ ಮೋಹನ್ ಕುಂಬಳೇಕರ್ ಕಾರ್ಯಕ್ರಮ ನಿರೂಪಿಸಿದರು. ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಹಕಾರ ಭಾರತಿ ಉಡುಪಿ ಜಿಲ್ಲಾ ಕೋಶಾಧ್ಯಕ್ಷ ಪ್ರಸಾದ್ ಶೆಟ್ಟಿ ವಂದಿಸಿದರು.
ಸಭೆಯಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 40 ಮಂದಿ ರಾಷ್ಟ್ರೀಯ, ರಾಜ್ಯಮಟ್ಟದ ಜವಾಬ್ದಾರಿಯುಳ್ಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.






