ಬೆಂಗಳೂರು: ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20 ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಬೇಕು ಮತ್ತು ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿವರ್ಷ ತಮ್ಮ ಆಸ್ತಿ ವಿವರ ಘೋಷಿಸಬೇಕು ಎಂಬುದು ಸೇರಿದಂತೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ 2025ರಲ್ಲಿ ತರಲಾಗಿರುವ ಹಲವು ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
https://chat.whatsapp.com/FCEnlTkAKCC0MGPhXtX4i4
ಈ ವಿಚಾರವಾಗಿ ಶಿವಮೊಗ್ಗದ ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಮಹಾಮಂಡಳ ನಿಯಮಿತ, ದಿ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತವು ಸಲ್ಲಿಸಿರುವ ಅರ್ಜಿಯು ನ್ಯಾ| ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿbಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ, ಸಹಕಾರ ಇಲಾಖೆ, ಸಂಸದೀಯ ಮತ್ತು ಶಾಸನ ರಚನಾ ಇಲಾಖೆ, ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆ.18ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ವಾದ ಮಂಡಿಸಿದರು. ಸಹಕಾರ ಸಂಘಗಳ ಕಾಯ್ದೆಗೆ ತರಲಾಗಿರುವ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳಲಿದೆ. ಈ ತಿದ್ದುಪಡಿಗಳು ಸಂವಿಧಾನಬಾಹಿರವಾಗಿದ್ದು, ಅವುಗಳನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥ ಆಗುವ ತನಕ ಕಾಯ್ದೆಯ ತಿದ್ದುಪಡಿಗಳ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.


