ಪುತ್ತೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಾಧಿಸಿರುವ ಅಭೂತಪೂರ್ವ ಹಾಗೂ ಸರ್ವತೋಮುಖ ಸಾಧನೆಯನ್ನು ಗುರುತಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 2025-26ನೇ ಸಾಲಿನ “ವಿಶೇಷ ಸಾಧನಾ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಪಟ್ಟಣ ಸಹಕಾರಿ ಬ್ಯಾಂಕ್ ವಿಭಾಗದಲ್ಲಿ ಬ್ಯಾಂಕಿನ ಉತ್ತಮ ಕಾರ್ಯನಿರ್ವಹಣೆ, ಪ್ರಗತಿ ಹಾಗೂ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ಪ್ರಶಸ್ತಿ ಸ್ವೀಕರಿಸಿದರು. ಪುತ್ತೂರು ಟೌನ್ ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ಹಿರಿಯ ನಿರ್ದೇಶಕರಾದ ಚಂದ್ರಶೇಖರ ರಾವ್ ಬಪ್ಪಳಿಗೆ ಮತ್ತು ಕಿರಣ್ ಕುಮಾರ್ ರೈ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಎಲ್ಲಾ ನಿರ್ದೇಶಕರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಾಜರಿದ್ದರು. ಬ್ಯಾಂಕಿನ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪ್ರಶಸ್ತಿಯನ್ನು ಸ್ವೀಕರಿಸಿದ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿಯೂ ಬ್ಯಾಂಕಿನ ಪ್ರಗತಿ ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.


