ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
https://chat.whatsapp.com/FCEnlTkAKCC0MGPhXtX4i4
ಈ ಸಂಬಂಧ ಬ್ಯಾಂಕಿನ ನಿರ್ದೇಶಕರೂ ಆಗಿರುವ ಕಡೂರಿನ ಮಾಜಿ ಶಾಸಕ ಕೆ.ಎಸ್.ಪ್ರಕಾಶ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ಅವರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘಗಳ ನಿಬಂಧಕರು, ಅಪೆಕ್ಸ್ ಬ್ಯಾಂಕ್ ಚುನಾವಣಾಧಿಕಾರಿ, ಸಹಕಾರ ಚುನಾವಣಾ ಪ್ರಾಧಿಕಾರ, ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಪೆಕ್ಸ್ ಬ್ಯಾಂಕ್ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ದೇವಿಪ್ರಸಾದ್ ಶೆಟ್ಟಿ ವಕಾಲತ್ತು ವಹಿಸಿದ್ದಾರೆ.
ಅರ್ಜಿಯಲ್ಲಿ ಏನಿದೆ?:
‘ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಮಂಡಳಿಯ ಅವಧಿ 2025ರ ಡಿಸೆಂಬರ್ 21ಕ್ಕೆ ಮುಕ್ತಾಯಗೊಂಡಿದೆ. 2026ರ ಜನವರಿ 23ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಿತು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಜುಲೈ 29ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅರ್ಜಿದಾರರು ಅದೇ ದಿನ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಚುನಾವಣೆ ಮುಂದೂಡಲಾಗಿದೆ’ ಎಂಬುದು ಅರ್ಜಿದಾರರ ದೂರು. ಏತನ್ಮಧ್ಯೆ, ‘ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಅರ್ಜಿದಾರರು ಫೆಬ್ರವರಿ 17ರಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದರು. ಸಹಕಾರ ಚುನಾವಣಾ ಪ್ರಾಧಿಕಾರವು, ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಫೆಬ್ರುವರಿ 26 ಮತ್ತು ಮಾರ್ಚ್ 18ರಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿತ್ತು. ಆದರೆ, ಈ ತನಕವೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣವೇ ಚುನಾವಣೆ ನಡೆಸಲು ಪ್ರತಿವಾದಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.


