ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್ ಮಂಗಳೂರು ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಾಮರಸ್ಯ ಬಳಗ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್ ಉದ್ಘಾಟಿಸಿ, ಮಹಿಳಾ ದಿನಾಚರಣೆಯಂದು ಮಾತ್ರ ಮಹಿಳೆಯರನ್ನು ಗೌರವಿಸುವುದಲ್ಲ, ಪ್ರತಿನಿತ್ಯವೂ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಮಹಿಳೆಯರು ತೊಂದರೆಯಲ್ಲಿದ್ದ ಸಂದರ್ಭದಲ್ಲಿ ಸ್ಪಂದಿಸಿದಾಗ ಮಾತ್ರ ಮಹಿಳಾ ದಿನಾಚರಣೆಯ ಅರ್ಥಪೂರ್ಣವಾಗುತ್ತದೆ. ಸಹಕಾರಿ ಸಂಘದಲ್ಲಿ 95% ಮಹಿಳೆಯರಿಗೆ ಉದ್ಯೋಗ ನೀಡಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದು ಮಹಿಳೆಯರಿಗೆ ನೀಡಿದ ಗೌರವವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿ, ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಮನಾ ಶರಣ್ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಉದ್ಯೋಗದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡ ಮಹಿಳೆಯೇ ಆಗಿದ್ದಾರೆ. ಮಹಿಳೆಯರು ಉನ್ನತ ಹುದ್ದೆಯನ್ನು ಅಲಂಕರಿಸುವುದು ತುಂಬಾ ಕಡಿಮೆ. ಆದರೆ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದು ಶ್ಲಾಘನೀಯ. ಸಹಕಾರಿ ಚುನಾವಣೆಯಲ್ಲಿ ಮಹಿಳೆಯರಿಗೆ 13 ಸೀಟುಗಳಲ್ಲಿ ಎರಡು ಸೀಟು ಮಾತ್ರ ಮೀಸಲಾತಿ ಇದೆ. ಮುಂದಿನ ದಿನಗಳಲ್ಲಿ ಈ ಮೀಸಲಾತಿಯು 50% ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕ ಮಹಿಳೆಯರಾದ ಸಾಹಿತಿಗಳು, ಸಮಾಜ ಸೇವಕರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಶಶಿಲೇಖಾ ಬಿ. ಹಾಗೂ ಪ್ರಾಣಿದಯಾಪರರಾದ ಉಷಾ ಸುವರ್ಣ ಅವರನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಶಿಲೇಖಾ ಬಿ., ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಮಹಿಳೆಯರು ಸಿಕ್ಕ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಿದ್ದು, ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತ ಬರುತ್ತಿರುವುದು ಶ್ಲಾಘನೀಯ ಎಂದರು.
ಉಷಾ ಸುವರ್ಣ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರನ್ನು ಗಮನಿಸಿದಾಗ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳೆಯರಿಗೆ ನೀಡುತ್ತಿರುವ ಗೌರವದ ಅರಿವಾಗುತ್ತದೆ. ಸಂಘದಲ್ಲಿ ದುಡಿಯುವ ವರ್ಗದವರು ಹೆಚ್ಚಿನವರು ಮಹಿಳೆಯರೇ ಆಗಿದ್ದು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳೆಯರ ಮನೆಯನ್ನು ಬೆಳಗಿಸುವ ಕಾರ್ಯ ಮಾಡುತ್ತಿದೆ. ಮಹಿಳೆಯರು ದಯಾಮಯರಾಗಿದ್ದು, ಅಶಕ್ತ ಪ್ರಾಣಿಗಳ ಪಾಲನೆಗಳಲ್ಲೂ ಕೂಡ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವರ್ಷಂಪ್ರತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಆಚರಿಸಿಕೊಂಡು ಬರುತ್ತಿದೆ. ಸಂಘವು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗ ನೀಡಿದ್ದು, ಮಹಿಳೆಯರು ಜೀವನದಲ್ಲಿ ಉತ್ತಮವಾದ ಸ್ಥಾನವನ್ನು ಪಡೆಯಬೇಕು ಎಂಬುದು ಇದರ ಆಶಯವಾಗಿದೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ 30 ಶಾಖೆಗಳ ಶಾಖಾಧಿಕಾರಿಗಳು ಕೂಡ ಮಹಿಳೆಯರೇ ಆಗಿದ್ದಾರೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಂ., ಚಂದ್ರಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ವಾಮನ್ ಕೆ., ಅಧ್ಯಕ್ಷರಾದ ಗೋಪಾಲ ಪೂಜಾರಿ ವೀರನಗರ, ಜೊತೆ ಕಾರ್ಯದರ್ಶಿ ವಿಶ್ವನಾಥ ರೆಂಜಾಳ ಮತ್ತಿತ್ತರರು ಉಪಸ್ಥಿತರಿದ್ದರು.
ಸಂಘದ ಉಳ್ಳಾಲ ಶಾಖೆಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿ, ಗಂಜಿಮಠ ಶಾಖೆಯ ಶಾಖಾಧಿಕಾರಿ ಸಂದೀಪ್ ವಂದಿಸಿದರು. ಸಂಘದ ಸಹಾಯಕ ಪ್ರಬಂಧಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

