ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಅತ್ಯುತ್ತಮ ಸಾಧನಾ ಪ್ರಶಸ್ತಿ ಲಭಿಸಿದೆ.
https://chat.whatsapp.com/FCEnlTkAKCC0MGPhXtX4i4
ಶುಕ್ರವಾರ ಬೆಂಗಳೂರಿನಲ್ಲಿ ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಎಸ್.ರವಿ ಅವರಿಂದ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಂ.ಮಹೇಶ್ ಹೆಗ್ಡೆ ಪ್ರಶಸ್ತಿ ಸ್ವೀಕರಿಸಿದರು. ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆ ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ 2024-25ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ, ವ್ಯವಹಾರದ ಗುರಿಯನ್ನು ಉತ್ತಮ ಶ್ರೇಣಿಯಲ್ಲಿ ತಲುಪಿದ್ದಕ್ಕಾಗಿ ಅಪೆಕ್ಸ್ ಬ್ಯಾಂಕಿನ ಬಹುಮಾನ ಯೋಜನೆಯನ್ವಯ ವರ್ಗೀಕರಣ ‘II’ ರಲ್ಲಿ ಪ್ರಥಮ ಸ್ಥಾನದೊಂದಿಗೆ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ಗೆ ಭಾಜನವಾಗಿದೆ.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿಯ ಪಥದಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ ರಾಜ್ಯದ ಅತ್ಯುತ್ತಮ ಬ್ಯಾಂಕ್ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ. ಸತತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ಗೆ ಇದು 24ನೇ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ.

ಸೇವೆಯೇ ಮುಖ್ಯ ಧ್ಯೇಯ:
ಗ್ರಾಹಕರ ಸೇವೆಯನ್ನೇ ಮುಖ್ಯ ಧ್ಯೇಯವಾಗಿಟ್ಟುಕೊಂಡು ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಯಶಸ್ಸಿನ ಪಥದಲ್ಲಿ ಮುನ್ನಡೆ ಕಾಣುತ್ತಿರುವ ಎಸ್ಸಿಡಿಸಿಸಿ ಬ್ಯಾಂಕಿಗೆ ವರ್ಷದಲ್ಲಿ ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಐದು ಬಾರಿ ಲಭಿಸಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇಕಡಾ ನೂರು ಮರುಪಾವತಿಯನ್ನು ಕಂಡಿದ್ದು, ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 31 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
ಶುಕ್ರವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕ್ನ ಉಪಾಧ್ಯಕ್ಷ ಶರಣೇಗೌಡ ಪಾಟೀಲ ಬಯ್ಯಾಪುರ, ಮಾಜಿ ಅಧ್ಯಕ್ಷ ಬೆಳ್ಳಿ ಪ್ರಕಾಶ್, ನಿರ್ದೇಶಕ ಕೊಡಂದೇರ ಪಿ.ಗಣಪತಿ, ಶಿವಕುಮಾರ್ ಗೌಡ ಪಾಟೀಲ್, ರಾಹುಲ್ ಸತೀಶ್ ಜಾರಕಿಹೊಳಿ, ಸೂರಜ್ ಆರ್., ಆರ್.ನರೇಂದ್ರ, ಪಿ.ಮೂಕಯ್ಯ ಸ್ವಾಮಿ, ಎಚ್.ಬಿ.ಮಂಜುನಾಥ ಹಾಜರಿದ್ದರು.










